ಗಳೂರು, ಏಪ್ರಿಲ್‌ 24: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಇಬ್ಬರು ಕನ್ನಡಿಗರು ಸೇರಿದಂತೆ ಸುಮಾರು 28 ಪ್ರವಾಸಿಗರು ಉಗ್ರರ ದಾಳಿಗೆ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ದೇಶದ ಎಲ್ಲಾ ರಾಜ್ಯಗಳು ಎಚ್ಚೆತ್ತುಕೊಂಡಿದ್ದು, ಕರ್ನಾಟಕದಲ್ಲಿಯೂ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ. ಭಾರತದಲ್ಲಿ ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ. ಉಗ್ರರು ಯಾವುದೇ ರಾಜ್ಯದಲ್ಲಿ ಇರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್‌ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್‌ ಘಟನೆ ಅತ್ಯಂತ ಹೇಯ ಹಾಗೂ ಅಮಾನುಷವಾದುದ್ದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.


ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್‌ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು ಎಂದು ಹೇಳಿದರು.

ಪುಲ್ವಾಮಾದಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ, ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಕೊಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ವಿಶೇಷ ಸಚಿವ ಸಂಪುಟ ಸಭೆಯ ಬಗ್ಗೆ ಮಾತನಾಡಿದ ಅವರು, ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

Mallika P Oneindia

source: oneindia.com

Post a Comment

Previous Post Next Post